Thursday, August 26, 2010

ನಾವು ಭಾರತೀಯರು

ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಪೆರ್ದೆರೆಗಳ ಗಾನದಲ್ಲಿ
ಬಯಲು ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚಲ್ಲಿ ಯಂತ್ರ ಘೋಷವೇಳುವಲ್ಲಿ
ಕಣ್ಣು ಬೇರೆ, ನೋಟವೊಂದು-
ನಾವು ಭಾರತೀಯರು.

ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಲಿನಲ್ಲಿ
ನಮ್ಮ ಯೋಧರೆತ್ತಿ ಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದ ನಮ್ಮ ಕೊರಲಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿದೆಲ್ಲ ಹಾಡಿನಲ್ಲಿ
ಭಾಷೆ ಬೇರೆ, ಭಾವವೊಂದು-
ನಾವು ಭಾರತೀಯರು.

ನಾಡಿಗಾಗಿ ತನುವ ತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲು ನೆರೆಗೆ ನೆರೆಳನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ, ನಾವು ಒಂದು-
ನಾವು ಭಾರತೀಯರು.

Monday, August 23, 2010

ಮಾನವನೆದೆಯಲಿ ಆರದೆ ಉರಿಯಲಿ

ರಚನೆ: ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ
ಹಾಡಿರುವವರು: ಶಿವಮೊಗ್ಗ ಸುಬ್ಬಣ್ಣ

ಮಾನವನೆದೆಯಲಿ ಆರದೆ ಉರಿಯಲಿ
ದೇವರು ಹೆಚ್ಚಿದ ದೀಪ
ರೇಗುವ ದನಿಗೂ ರಾಗವು ಒಲಿಯಲಿ
ಮೂಡಲಿ ಮಧುರಾಲಾಪ

ಕೊಲ್ಲಲು ಎತ್ತಿದ ಕೈಗೂ ಗೊತ್ತಿದೆ
ಕೆನ್ನೆಯ ಸವರುವ ಪ್ರೀತಿ
ಇರಿಯುವ ಮುಳ್ಳಿನ ನಡುವೆಯೆ ನಗುವುದು
ಗುಲಾಬಿ ಹೂವಿನ ರೀತಿ...

ಉರಿಯನು ಕಾರುವ ಆಗಸ ತಾರದೆ
ತಂಪನು ತೀಡುವ ಮಳೆಯ?
ಲಾವಾರಸವನು ಕಾರುವ ಧರೆಯೇ
ನೀಡದೆ ಅನ್ನದ ಬೆಳೆಯ?

ಹಮ್ಮು ಬಿಮ್ಮುಗಳ ಮರುಳುಗಾಡಿನಲಿ
ಎಲ್ಲೋ ತಣ್ಣನೆ ಚಿಲುಮೆ
ತಾಪವ ಹರಿಸಿ ಕಾಪಾಡುವುದು
ಒಳಗೇ ಸಣ್ಣಗೆ ಒಲುಮೆ...